ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಅಂತ ನಮೂದಿಸಿರೋದು ಕೋಲಾಹಲ ಸೃಷ್ಟಿಸಿದೆ. ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಕ್ಫ್ ಬೋರ್ಡ್ನ ದುರಾಸೆ ವಿಜಯಪುರ ರೈತರ ಜಮೀನಿನವರೆಗೂ ತಲುಪಿದೆ ಎನ್ನುವ ಆರೋಪ ಕೇಳಿ ಬಂದಿದೆ. ವಕ್ಫ್ ಬೋರ್ಡ್ ಕಡೆಯಿಂದ ರೈತರಿಗೆ ನೊಟೀಸ್ ಜಾರಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ದೊಡ್ಡ ಚರ್ಚೆಯಾಗುತ್ತಿದ್ದು,
ಇದರ ಬೆನ್ನಲ್ಲೇ ಮಾಜಿ ವಕ್ಫ್ ಸಚಿವೆ, ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪುತ್ರನ ಜಮೀನು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಾಗಿದೆ. ಇದೇ ರೀತಿ ಹಲವು ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಬಹಿರಂಗಗೊಂಡಿದೆ.
ಹೌದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪುತ್ರ ಬಸವ ಪ್ರಸಾದ್ ಜೊಲ್ಲೆ ಮಾಲೀಕತ್ವದ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ. ಯಕ್ಸಂಬಾ ಪಟ್ಟಣದಲ್ಲಿರುವ ಜೊಲ್ಲೆ ಮಾಲೀಕತ್ವದ 3 ಎಕರೆಗಿಂತಲೂ ಹೆಚ್ಚಿನ ಜಮೀನಿನ ಮೇಲೆ ವಕ್ಫ್ ಕಣ್ಣು ಹಾಕಿದೆ. ಇಷ್ಟೇ ಅಲ್ಲದೇ ಯಕ್ಸಂಬಾ ಪಟ್ಟಣದ ಜೊಲ್ಲೆ ಕುಟುಂಬದ ಹಲವರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ.
ಇದಕ್ಕೂ ಮೊದಲು ವಿಜಯಪುರದಲ್ಲಿ ನೂರಾರು ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿದ್ದ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕ್ಷೇತ್ರದ ಹೊನವಾಡ ಗ್ರಾಮದ 15 ರೈತರಿಗೆ ನೋಟಿಸ್ ಹೋಗಿತ್ತು. ನೋಟಿಸ್ನಲ್ಲಿ ನಿಮ್ಮ ಜಮೀನು ವಕ್ಫ್ ಆಸ್ತಿಯಾಗಿದ್ದು, ಪಹಣಿ ಪತ್ರದಲ್ಲಿ ಕಾಲಂ ನಂ 11 ಹಾಗೂ 9ರಲ್ಲಿ ಉಲ್ಲೇಖಿಸಿ, 2 ದಿನದಲ್ಲಿ ತಕರಾರು ಸಲ್ಲಿಸಲು ಸೂಚಿಸಲಾಗಿತ್ತು.