ಹುಬ್ಬಳ್ಳಿ: ಜನರ ದಿಕ್ಕು ತಪ್ಪಿಸುವುದು, ಮಿಸ್ ಗೈಡ್ ಮಾಡುವುದು ಕಾಂಗ್ರೆಸ್ ಸಂಸ್ಕೃತಿ ಆಗಿಬಿಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಯಾವತ್ತೂ ಜನರನ್ನು ಮನವರಿಕೆ ಮಾಡುವುದಿಲ್ಲ, ಬರೀ ಗೊಂದಲ ಸೃಷ್ಟಿ ಮಾಡುವುದರಲ್ಲೇ ಇರುತ್ತಾರೆ. ಅದು ಕಾಂಗ್ರೆಸ್ಸಿಗರ ಡಿಎನ್ಎಯಲ್ಲಿಯೇ ಬಂದಿದೆ. ಈಗ ವಕ್ಫ್ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರದವರು ಜನರಿಗೆ ಗೊಂದಲ ಉಂಟುಮಾಡುತ್ತಿದೆ. ಆದರೆ, ಬಿಜೆಪಿ ಯಾವತ್ತೂ ಸ್ಪಷ್ಟ ನಿಲುವು ತೋರಿದೆ, ವಕ್ಫ್ ಅತಿಕ್ರಮಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ಸಿನವರು ಬುದ್ಧಿ ಇದ್ದು ಮಾಡುತ್ತಿದ್ದಾರೋ? ಬುದ್ಧಿ ಇಲ್ಲದೇ ಮಾಡ್ತಾ ಇದ್ದಾರೋ ಗೊತ್ತಿಲ್ಲ. ಬಿಜೆಪಿ ವಕ್ಫ್ ಆಸ್ತಿ ಸಂರಕ್ಷಣೆ ಮಾಡುತ್ತದೆ ಎನ್ನುತ್ತ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವಕ್ಫ್ ಆಸ್ತಿಯನ್ನು ಸಂರಕ್ಷಿಸುವ ಕೆಲಸವನ್ನು ಬಿಜೆಪಿ (BJP) ಹಿಂದೆಯೂ ಮಾಡಿದೆ, ಮುಂದೆಯೂ ಮಾಡುತ್ತದೆ. ಆದರೆ ವಕ್ಫ್ ಹೆಸರಲ್ಲಿ ಭೂಗಳ್ಳರು ಬಡವರ, ರೈತರ, ಜನಸಾಮಾನ್ಯರ ಆಸ್ತಿ ಕಬಳಿಸಲು ಹೊರಟರೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.