ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಇಬ್ಬರು ಶಾಲಾ ಮಕ್ಕಳು ದಾರುಣವಾಗಿ ಮೃತಪಟ್ಟಿದ್ದು, ಮೂವರು ಮಕ್ಕಳ ಕಾಲುಗಳು ತುಂಡಾಗಿವೆ. ಒಂದನೇ ತರಗತಿ ವಿದ್ಯಾರ್ಥಿ ಸಮರ್ಥ, ಏಳನೇ ತರಗತಿ ವಿದ್ಯಾರ್ಥಿ ಶ್ರೀಕಾಂತ್ ಮೃತದುರ್ದೈವಿಗಳು. ಖಾಸಗಿ ಶಾಲೆಯ ಬಸ್ವೊಂದು ಮಕ್ಕಳನ್ನು ಕರೆದುಕೊಂಡು ಕಪಗಲ್ನಿಂದ ಮಾನ್ವಿ ಕಡೆ ಹೊರಟಿತ್ತು. ಸಾರಿಗೆ ಬಸ್ ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟ್ಟಿದ್ದಾಗ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ಮಕ್ಕಳಿಬ್ಬರ ಕಾಲು ತುಂಡಾಗಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕುಡಿ ಗ್ರಾಮದ ಓರ್ವ ಬಾಲಕ ಮತ್ತು ಬಾಲಕಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಗೆ ಎಸ್ಪಿ ಮತ್ತು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಿಮ್ಸ್ ಆಸ್ಪತ್ರೆ ಮುಂಭಾಗ ಮುಟ್ಟಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ಕಾಲು ತುಂಡಾಗಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.
ಒಟ್ಟು 32 ಮಕ್ಕಳು ಶಾಲಾ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಆ ಪೈಕಿ 18 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 14 ಮಕ್ಕಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 14 ಮಕ್ಕಳ ಪೈಕಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ.