ಕಲಬುರ್ಗಿ:- ಕಲಬುರಗಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಹತ್ಯೆಗೆ ಸಂಚು ರೂಪಿಸಿರೋದು ಇದೀಗ ಬಯಲಾಗಿದೆ. ಪೊಲೀಸ್ ಇನ್ಸಪೆಕ್ಟರ್ ಗೆ ಆಡಿಯೋ ಸಂದೇಶ ಕಳುಹಿಸಿರುವ ಕಿಡಿಗೇಡಿ, ಕಾರು ಸ್ಪೋಟಿಸುವ ಬೆದರಿಕೆ ಹಾಕಿದ್ದಾರೆ.
ಇನ್ನೂ ಕೈದಿಗಳೇ ಅಧೀಕ್ಷಕಿ ಅನಿತಾ ಹತ್ಯೆಗೆ ಸಂಚು ಹೂಡಲಾಗಿದೆಯೇ ಎಂಬ ಅನುಮಾನ ಇದೀಗ ಶುರುವಾಗಿದೆ.
ಸದ್ಯ ಪೊಲೀಸ್ ಇನ್ಸ್ಪೆಕ್ಟರ್ ಆಡಿಯೋ ಬೆದರಿಕೆ ಸಂದೇಶದ ಬಗ್ಗೆ ಸುಪರಿಂಟೆಂಡೆಂಟ್ ಗಮನಕ್ಕೆ ತಂದಿದ್ದಾರೆ. ಇದೀಗ ಬೆದರಿಕೆ ಸಂದೇಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅನಿತಾ, ಸಿಸಿಟಿವಿ ಕಣ್ಗಾವಲಿನಲ್ಲೇ ಕಾರು ಪಾರ್ಕ್ ಮಾಡುವಂತೆ ಸೂಚನೆ ನೀಡಿದ್ದಾರೆ. ಜೈಲಿನ ಬಳಿ ಹಾಗೂ ಇತರೆಡೆಗಳಲ್ಲಿ ಎಲ್ಲೇ ಆದರೂ ಸಿಸಿಟಿವಿ ಇರುವ ಕಡೆ ಕಾರ್ ಪಾರ್ಕಿಂಗ್ ಮಾಡಲು ಸೂಚನೆ ನೀಡಿದ್ದಾರೆ.
ಒಂದೂವರೆ ತಿಂಗಳ ಹಿಂದೆಯಷ್ಟೆ ಅನಿತಾ ಕಲಬುರಗಿ ಜೈಲಿಗೆ ವರ್ಗಾವಣೆಯಾಗಿ ಬಂದಿದ್ದಾರೆ. ಅವರು ಅಧಿಕಾರ ಸ್ವೀಕಾರ ಮಾಡಿದ ದಿನವೇ ಜೈಲಿನಲ್ಲಿ ಕೈದಿಗಳು ಹೈಫೈ ಜೀವನ ನಡೆಸುತ್ತಿರುವುದು ಅನಾವರಣ ಆಗಿತ್ತು. ಇದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು.
ಅನಿತಾ ಅವರು ಜೈಲಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದ್ದರಿಂದ ಕೆರಳಿದ ಕೈದಿಗಳೇ ಬೆದರಿಕೆ ಸಂದೇಶ ಕಳುಹಿಸಿದರೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ. ಹೀಗಾಗಿ ಎಲ್ಲಾ ಆಯಾಮದಲ್ಲೂ ತನಿಖೆ ಚುರುಕುಗೊಂಡಿದೆ.