ಸೋನಿಪತ್:- ಕರ್ನಾಟಕದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಜಮೀನು ಹಗರಣದ ಆರೋಪ ಕೇಳಿಬಂದಿದೆ. ಅದರ ತನಿಖೆ ಶುರುವಾಗುತ್ತಿದ್ದಂತೆಯೇ ಹೈಕೋರ್ಟ್ಗೆ ಹೋಗಿದ್ದಾರೆ. ಹೈಕೋರ್ಟ್ ಕೂಡ ಅವರಿಗೆ ಛಾಟಿ ಬೀಸಿದೆ. ನಿನ್ನೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶ ಮಾಡಿದೆ. ಸಿದ್ದರಾಮಯ್ಯ ವಿರುದ್ದ ತನಿಖೆ ಆಗಲೇಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡು ವರ್ಷವೂ ಆಗಿಲ್ಲ. ಈ ರೀತಿ ಭ್ರಷ್ಟಾಚಾರ ಮಾಡಿದ ಪಕ್ಷಕ್ಕೆ ಹರಿಯಾಣದಲ್ಲಿ ಅವಕಾಶ ಕೊಡುತ್ತೀರಾ? ಎಂದು ಹರಿಯಾಣದ ಸೋನಿಪತ್ ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಹಿನ್ನಡೆಯಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಂತಹ ಪಕ್ಷಕ್ಕೆ ಅಧಿಕಾರ ನೀಡಲು ಹರಿಯಾಣ ರಾಜ್ಯ ಸಿದ್ಧವಿದೆಯೇ ಎಂದು ಹರಿಯಾಣದ ಜನರನ್ನು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನಕಲಿ ಯೋಜನೆಗಳನ್ನು ಘೋಷಿಸಿದೆ. ರೈತರು, ಜನರಿಗೆ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಿಲ್ಲ. ಕರ್ನಾಟಕದ ಜನರಿಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ದಲಿತರ ಹಣ ಲೂಟಿ ಮಾಡಿದೆ ಎಂದು ಮೋದಿ ಟೀಕೆ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿ ಅಧಿಕಾರಕ್ಕೆ ಬಂದರೂ, ಅವರು ಬಹಳಷ್ಟು ಭ್ರಷ್ಟಾಚಾರವನ್ನು ಮಾಡಿದ್ದಾರೆ. ಭಾರತದ ಸರ್ಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರಕ್ಕೆ ಜನ್ಮ ನೀಡಿದ ಮತ್ತು ಪೋಷಿಸಿದ ಪಕ್ಷ ಕಾಂಗ್ರೆಸ್. ಭಾರತದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ತಾಯಿ. ಹೈಕಮಾಂಡ್ ಭ್ರಷ್ಟರಾಗಿದ್ದಾಗ ಎಲ್ಲರೂ ಭ್ರಷ್ಟಾಚಾರ ಮತ್ತು ಲೂಟಿ ಮಾಡಲು ಪರವಾನಗಿ ಪಡೆಯುತ್ತಾರೆ ಎಂದು ಸೋನಿಪತ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಹೇಳಿದರು.